ಬೆಂಗಳೂರು: ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ 'ಬಣ' ರಾಜಕೀಯ ಶನಿವಾರ ಮತ್ತಷ್ಟು ತೀವ್ರಗೊಂಡಿದೆ.ಯಾರ ಜತೆಗೆ ನಿಂತರೆ ಲಾಭ ಎಂಬ ಲೆಕ್ಕಾಚಾರದಲ್ಲಿರುವ ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ಇಬ್ಬರು ನಾಯಕರನ್ನೂ ಭೇಟಿ ಮಾಡಿ, ತಮ್ಮ ಪರ ಲಾಬಿ ನಡೆಸುವಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮನೆಗೆ ಶಾಸಕರು ಭೇಟಿ ನೀಡಿ ಸಮಾಲೋಚನೆ ನಡೆಸಿದರು. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆ, ತಂತ್ರ-ಪ್ರತಿತಂತ್ರದ ರಾಜಕಾರಣ ತಾರಕಕ್ಕೇರಿದ್ದರೂ ಆ ಪಕ್ಷದ ಹೈಕಮಾಂಡ್ ಮೌನ ವಹಿಸಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಲ್ಲಿಯೇ ಇದ್ದರೂ ಈ ಬಗ್ಗೆ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಸಿನಿಮಾ ಖರ್ಗೆ ಅವರ ಸೂಚನೆ ಮೇರೆಗೆ ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ಶನಿವಾರ ರಾತ್ರಿ ತೆರಳಿದ ಸಿದ್ದರಾಮಯ್ಯ ಅವರು ಒಂದು ತಾಸಿಗೂ ಹೆಚ್ಚು ಮಾತುಕತೆ ನಡೆಸಿದರು. ಆದರೆ, ಅವರಿಬ್ಬರ ನಡುವಿನ ಖಾಸಗಿ ಮಾತುಕತೆಯ ವಿವರ ಬಹಿರಂಗಗೊಂಡಿಲ್ಲ. ಈ ಬೆಳವಣಿಗೆಯು ಹೈಕಮಾಂಡ್ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಮುನ್ಸೂಚನೆ ಎಂದೇ ವಿಶ್ಲೇಷಿಸಲಾಗಿದೆ. ಜೊತೆಗೆ, ಹೈಕಮಾಂಡ್ ನಡೆ ಯಾವ ಕಡೆ ಎಂಬ ಕುತೂಹಲವೂ ಮೂಡಿದೆ.
ಸಿಎಂ ಹುದ್ದೆ ಕಚ್ಚಾಟದಿಂದಾಗಿ ಆಡಳಿತ ನಿಷ್ಕ್ರಿಯ: ಆರ್ ಅಶೋಕ್:
ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, 'ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ನಿರ್ಣಾಯಕ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ತೀರ್ಮಾನ ನೀಡದೇ ಇದ್ದರೆ, ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳೂ ಕೆಲಸ ಮಾಡುವುದಿಲ್ಲ' ಎಂದು ಕಳವಳ ವ್ಯಕ್ತಪಡಿಸಿದರು. 'ಈ ಕಚ್ಚಾಟದಿಂದಾಗಿ ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೇಳಿಸಿಕೊಳ್ಳುವವರು ಯಾರೂ ಇಲ್ಲದಂತಾಗಿದೆ. ರಾಜ್ಯದ ಮುಖ್ಯಮಂತ್ರಿ ಯಾರಾಗಿರುತ್ತಾರೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಕೂಡಲೇ ಸ್ಪಷ್ಟಪಡಿಸಬೇಕು' ಎಂದು ಒತ್ತಾಯಿಸಿದರು.
ಶೀಘ್ರದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಚ್.ಡಿ ಕುಮಾರಸ್ವಾಮಿ:
ಬೆಂಗಳೂರು: 'ಕೆಲವೇ ತಿಂಗಳುಗಳಲ್ಲಿ ರಾಜ್ಯ ರಾಜಕಾರಣವು ಸ್ಫೋಟಕ ಬೆಳವಣಿಗೆಗೆ ಸಾಕ್ಷಿಯಾಗಲಿದೆ. ಆ ರಾಜಕೀಯ ಬೆಳವಣಿಗೆಗೆ ಜೆಡಿಎಸ್ ಕಾರ್ಯಕರ್ತರು ಸಿದ್ಧರಾಗಿರಬೇಕು' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.ರಾಜ್ಯದಲ್ಲಿ ಯಾರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗದ ಪರಿಸ್ಥಿತಿ ಸೃಷ್ಟಿಯಾಗಿದೆ. ಕೆಲವೇ ತಿಂಗಳಲ್ಲಿ ರಾಜಕೀಯ ಕ್ರಾಂತಿ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಬಳಿಯೇ ಇರಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಿರಬೇಕು' ಎಂದು ಕರೆ ನೀಡಿದರು. 'ಕಾಂಗ್ರೆಸ್ನ ಕೆಟ್ಟ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಜಾತಿ ಹೆಸರಿನಲ್ಲಿ ಜನರನ್ನು ಒಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು 25-30 ವರ್ಷದಿಂದಲೂ ಅಧಿಕಾರದಲ್ಲಿಯೇ ಇದ್ದಾರೆ. ಈ ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ? ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದಾರೆ' ಎಂದು ಪ್ರಶ್ನಿಸಿದರು. 'ಈ ಎಲ್ಲದರ ವಿರುದ್ಧ, ಜನರ ಪರವಾಗಿ ನಾವು ಹೋರಾಡಬೇಕು. ರಾಜ್ಯದ ಜನರು ನಮಗೆ ಐದು ವರ್ಷ ಅಧಿಕಾರ ನೀಡಬೇಕು. ಅವರಿಗೆ ಎಷ್ಟು ಒಳ್ಳೆಯದನ್ನು ಮಾಡಲು ಸಾಧ್ಯವೋ, ಅದೆಲ್ಲವನ್ನೂ ಮಾಡುತ್ತೇನೆ. ಇಲ್ಲದೇ ಇದ್ದರೆ ಜನರಿಗೆ ಮುಖ ತೋರಿಸುವುದಿಲ್ಲ' ಎಂದು ಶಪಥ ಮಾಡಿದರು.
'ಹೈಕಮಾಂಡ್ ತೀರ್ಮಾನ ನಾನೂ, ಶಿವಕುಮಾರ್ ಒಪ್ಪಬೇಕು'
ಬೆಂಗಳೂರು: 'ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ನಾನೂ ಒಪ್ಪಬೇಕು, ಡಿ.ಕೆ. ಶಿವಕುಮಾರ್ ಕೂಡಾ ಒಪ್ಪಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಖರ್ಗೆ ಅವರ ಭೇಟಿ ಬಳಿಕ ಮತನಾಡಿದ ಅವರು, 'ಯಾವಾಗ ದೆಹಲಿಗೆ ನನ್ನನ್ನು ಕರೆಯುತ್ತಾರೋ ಆಗ ಹೋಗುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು, ಎಲ್ಲ ನಾಯಕರೂ ಬದ್ಧರಾಗಿರಬೇಕು' ಎಂದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 'ನಾನು ಕಳೆಗುಂದಿಲ್ಲ. ನಾನು ಯಾವಾಗಲೂ ಕಳೆಗುಂದುವ ಪ್ರಶ್ನೆಯೇ ಇಲ್ಲ. ಅತಿಯಾಗಿ ಖುಷಿಯಾಗಿಯೂ ಇರುವುದಿಲ್ಲ' ಎಂದರು. “ನಾನು ಮತ್ತು ಖರ್ಗೆ ಒಂದೂವರೆ ತಾಸು ಚರ್ಚೆ ಮಾಡಿದ್ದೇವೆ. ಇದು ಸೌಹಾರ್ದ ಭೇಟಿ ಅಷ್ಟೆ. ಪಕ್ಷ ಸಂಘಟನೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ' ಎಂದೂ ಹೇಳಿದರು.